ಶೃಂಗೇರಿ ಮತ ಮರು ಎಣಿಕೆ ವಿವಾದ: ಪ್ರಮಾಣವಚನ ಸ್ವೀಕಾರಕ್ಕೆ ವಿಳಂಬ ಮಾಡಿಲ್ಲ, ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ

Edited By:

Updated on: May 06, 2026 | 10:56 AM

ಶೃಂಗೇರಿ ಶಾಸಕ ಜೀವರಾಜ್ ಪ್ರಮಾಣವಚನ ಸ್ವೀಕಾರ ವಿಳಂಬದ ಬಗ್ಗೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸ್ಪೀಕರ್ ಯು.ಟಿ. ಖಾದರ್ ತಳ್ಳಿಹಾಕಿದ್ದಾರೆ. ತಾಂತ್ರಿಕ ಕಾರಣಗಳಿಂದಾಗಿ ಕಾನೂನು ಅಭಿಪ್ರಾಯ ಪಡೆಯುವುದು ಅಗತ್ಯವಿದ್ದು, ಸಂವಿಧಾನದ ಚೌಕಟ್ಟಿನಲ್ಲೇ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೈಕೋರ್ಟ್ ನಿರ್ದೇಶನದಂತೆ ನಡೆದ ಮರು ಮತ ಎಣಿಕೆಯಲ್ಲಿ ಜೀವರಾಜ್ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಮಂಗಳೂರು, ಮೇ 6: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ ನಂತರ ಹೊಸದಾಗಿ ಶಾಸಕರಾಗಿ ಆಯ್ಕೆಯಾದ ಜೀವರಾಜ್ ಪ್ರಮಾಣವಚನ ಸ್ವೀಕಾರಕ್ಕೆ ವಿಳಂಬ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಯಾವುದೇ ವಿಳಂಬ ಮಾಡಿಲ್ಲ, ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಡಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ವಿಶ್ವಾಸದ ಮೇಲೆ ನಡೆಯಬೇಕು, ವಿಶ್ವಾಸವಿಲ್ಲದಿದ್ದರೆ ವ್ಯವಸ್ಥೆ ಬಲಿಷ್ಠವಾಗಲು ಸಾಧ್ಯವಿಲ್ಲ ಎಂದು ಸ್ಪೀಕರ್ ತಿಳಿಸಿದರು. ನಾನು ಬೆಂಗಳೂರಿನಲ್ಲಿದ್ದಾಗ ಯಾರೂ ನನ್ನನ್ನು ಭೇಟಿ ಮಾಡಿಲ್ಲ. ನಿನ್ನೆಯಷ್ಟೇ ಸಮಯ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದೊಂದು ವಿಶಿಷ್ಟ ಸನ್ನಿವೇಶವಾಗಿದ್ದು, ತಾಂತ್ರಿಕ ವಿಚಾರಗಳ ಬಗ್ಗೆ ಅಭಿಪ್ರಾಯ ಪಡೆಯಬೇಕಿದೆ. ಸಂವಿಧಾನಾತ್ಮಕವಾಗಿ ಅವಕಾಶ ನೀಡಲೇಬೇಕು, ಇದರಲ್ಲಿ ಆತುರ ಅಥವಾ ಸಂಶಯ ಪಡುವುದು ಸರಿಯಲ್ಲ ಎಂದು ಅವರು ಹೇಳಿದರು.

ಸರ್ಕಾರದ ಕಾನೂನು ಹೋರಾಟಕ್ಕೂ ತಮಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಇಡೀ ಪ್ರಕ್ರಿಯೆಯಲ್ಲಿ ಎಲ್ಲಿ, ಯಾರು ತಪ್ಪು ಮಾಡಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ ಮಾಡಲಾಗಿತ್ತು. ಇದರಲ್ಲಿ ಬಿಜೆಪಿಯ ಜೀವರಾಜ್ ವಿಜಯಿ ಎಂಬುದು ತಿಳಿದುಬಂದಿತ್ತು. ಈವರೆಗೆ ಕಾಂಗ್ರೆಸ್​ನ ಟಿಡಿ ರಾಜೇಗೌಡ ಶಾಸಕರಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More