ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ: ಸಂಸದ ತೇಜಸ್ವಿ ಸೂರ್ಯ

Updated on: Feb 07, 2026 | 3:22 PM

ಸಂಸದ ತೇಜಸ್ವಿ ಸೂರ್ಯ ಅವರು ಮೆಟ್ರೋ ದರ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳು ದರ ಪರಿಷ್ಕರಣೆಗೆ ಒತ್ತಾಯಿಸಿರುವುದನ್ನು ದಾಖಲೆಗಳೊಂದಿಗೆ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಬಿಎಂಆರ್‌ಸಿಎಲ್‌ಗೆ ನೀಡುತ್ತಿದ್ದ ನೆರವನ್ನು ನಿಲ್ಲಿಸಿದ್ದು, ಇದರಿಂದಾಗಿ ಸಾರ್ವಜನಿಕರ ಮೇಲೆ ಆರ್ಥಿಕ ಹೊರೆ ಹೆಚ್ಚಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು, ಫೆ.7: ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವು ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿದ್ದು, ಸಂಸದ ತೇಜಸ್ವಿ ಸೂರ್ಯ ಅವರು ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಫೇರ್ ಫಿಕ್ಸೇಷನ್ ಸಮಿತಿಯ ಮುಂದೆ ಮೆಟ್ರೋ ದರಗಳನ್ನು ವಾರ್ಷಿಕವಾಗಿ ಪರಿಷ್ಕರಿಸುವ ತಕ್ಷಣದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದ್ದರು ಎಂದು ಅವರು ದಾಖಲೆಗಳನ್ನು ಉಲ್ಲೇಖಿಸಿ ಹೇಳಿದ್ದಾರೆ. ಇದು ರಾಜ್ಯ ಸರ್ಕಾರದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶ ಹೊಂದಿತ್ತು ಎಂದು ಅವರು ತಿಳಿಸಿದ್ದಾರೆ. ದೆಹಲಿ, ಕೋಲ್ಕತ್ತಾ, ಕೊಚ್ಚಿನ್, ಹೈದರಾಬಾದ್‌ನಂತಹ ನಗರಗಳಲ್ಲಿ ವಾರ್ಷಿಕ ದರ ಪರಿಷ್ಕರಣೆ ನಿಯಮ ಇಲ್ಲದಿದ್ದರೂ, ಕರ್ನಾಟಕದ ಅಧಿಕಾರಿಗಳು ಪ್ರತಿ ವರ್ಷ ದರ ಏರಿಕೆಗೆ ಶಿಫಾರಸು ಮಾಡಿದ್ದರು. ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಯು ಬಿಎಂಆರ್‌ಸಿಎಲ್‌ಗೆ ಈ ಕುರಿತು ಹಲವು ಬಾರಿ ಪತ್ರ ಬರೆದು ಫೇರ್ ಫಿಕ್ಸೇಷನ್ ಸಮಿತಿಯನ್ನು ಶೀಘ್ರವಾಗಿ ರಚಿಸುವಂತೆ ಒತ್ತಾಯಿಸಿದೆ ಎಂದು ಅವರು ಮಾಹಿತಿ ನೀಡಿದರು. ಇನ್ನು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಬಿಎಂಆರ್‌ಸಿಎಲ್‌ಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಷಾಡೋ ಕ್ಯಾಶ್ ಸಪೋರ್ಟ್ ನೀಡುತ್ತಿತ್ತು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಯಾವುದೇ ನಗದು ನಷ್ಟವಾದರೆ ಮರುಪಾವತಿಗೆ, ಸಾಲದ ಮೇಲಿನ ಬಡ್ಡಿಯನ್ನು ಪಾವತಿಸಲು ಬಡ್ಡಿ ರಹಿತ ಸಬ್-ಡೆಟ್ ಸಾಲ ಪಾವತಿಗಳನ್ನು ರಾಜ್ಯ ಸರ್ಕಾರವು ಭಾರತ ಸರ್ಕಾರ ಮತ್ತು ದೇಶೀಯ ಹಣಕಾಸು ಸಂಸ್ಥೆಗಳಿಗೆ ಮಾಡುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಷಾಡೋ ಕ್ಯಾಶ್ ಸಪೋರ್ಟ್ ಅನ್ನು ನಿಲ್ಲಿಸಿದೆ ಎಂದು ಅವರು ಆರೋಪಿಸಿದರು. ಇದರ ಪರಿಣಾಮವಾಗಿ, ಕಳೆದ ಮೂರು ವರ್ಷಗಳಿಂದ ಬಿಎಂಆರ್‌ಸಿಎಲ್‌ಗೆ ರಾಜ್ಯ ಸರ್ಕಾರ ನೀಡಬೇಕಾದ 400 ಕೋಟಿ ರೂಪಾಯಿಗಳು ಈಗಲೂ ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us