ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ

Updated on: Aug 22, 2026 | 6:10 PM

ತೆಲಂಗಾಣ ಸಚಿವ ಜೂಪಲ್ಲಿ ಕೃಷ್ಣರಾವ್ ಪೆಂಟ್ಲವೆಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಸ್ವಚ್ಛತೆ ಕೊರತೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೊಳಕು ಶೌಚಾಲಯವನ್ನು ಸ್ವತಃ ತಾವೇ ಸ್ವಚ್ಛಗೊಳಿಸುವ ಮೂಲಕ ಅಧಿಕಾರಿಗಳಿಗೆ ಪಾಠ ಕಲಿಸಿದರು. ಸಾರ್ವಜನಿಕ ಅರ್ಜಿಗಳ ವಿಲೇವಾರಿಯಲ್ಲಿನ ವಿಳಂಬ ಧೋರಣೆ ಕುರಿತು ಆಕ್ರೋಶ ವ್ಯಕ್ತಪಡಿಸಿ, ಸಕಾಲಕ್ಕೆ ಸೇವೆ ಒದಗಿಸುವಂತೆ ಖಡಕ್ ಎಚ್ಚರಿಕೆ ನೀಡಿದರು.

ತೆಲಂಗಾಣ, ಆ.22: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸ್ವಚ್ಛತೆಯ ಅಭಾವ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ತೆಲಂಗಾಣ ಸಚಿವ ಜೂಪಲ್ಲಿ ಕೃಷ್ಣರಾವ್, ಅಧಿಕಾರಿಗಳಿಗೆ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಪೆಂಟ್ಲವೆಲ್ಲಿ ತಹಶೀಲ್ದಾರ್ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ಸಚಿವರು, ಕಚೇರಿಯ ಕೊಳಕು ವಾತಾವರಣ ಮತ್ತು ಆಸ್ವಚ್ಛ ಶೌಚಾಲಯವನ್ನು ಕಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ ಕಚೇರಿಯ ಶೌಚಾಲಯ ತೀರಾ ಕೊಳಕಾಗಿರುವುದನ್ನು ಕಂಡು ಕೆಂಡಾಮಂಡಲರಾದ ಸಚಿವರು, ಅಧಿಕಾರಿಗಳನ್ನೇ ತರಾಟೆಗೆ ತೆಗೆದುಕೊಂಡರು. ಬಳಿಕ ತಾವೇ ಸ್ವತಃ ನೀರು ಸುರಿದು ಶೌಚಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಅಧಿಕಾರಿಗಳಿಗೆ ಪ್ರತ್ಯಕ್ಷ ಪಾಠ ಮಾಡಿದರು. “ಇದು ಸಾರ್ವಜನಿಕರು ಬಂದು ಹೋಗುವ ಸರ್ಕಾರಿ ಕಚೇರಿ. ಇಷ್ಟೊಂದು ಕೊಳಕಾಗಿಟ್ಟುಕೊಂಡರೆ ಹೇಗೆ?” ಎಂದು ತೀವ್ರ ತರಾಟೆಗೆ ತೆಗೆದುಕೊಂಡ ಸಚಿವರು, ತಕ್ಷಣದಿಂದಲೇ ಕಚೇರಿಯ ಸ್ವಚ್ಛತೆಯನ್ನು ಕಾಪಾಡುವಂತೆ ಖಡಕ್ ಸೂಚನೆ ನೀಡಿದರು. ಕಚೇರಿಯಲ್ಲಿದ್ದ ಕಂದಾಯ ಇಲಾಖೆಯ ಬಾಕಿ ಕಡತಗಳು (Files) ಹಾಗೂ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿದ ಸಚಿವರು, ಅರ್ಜಿ ವಿಲೇವಾರಿಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಾರ್ವಜನಿಕ ಸೇವೆಗಳನ್ನು ಸಕಾಲಕ್ಕೆ ತಲುಪಿಸಬೇಕು, ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಅಲೆದಾಡಿಸಬಾರದು ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us