ಮಹಾ ಮಳೆಗೆ ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ
ವಿಜಯಪುರದ ಮೊರಟಗಿ ಗ್ರಾಮದಲ್ಲಿ ಸುರಿದ ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಸ್ವಂತ ಮನೆ ದುರಸ್ತಿ ಹಿನ್ನೆಲೆ ಬಾಡಿಗೆ ಮನೆಯಲ್ಲಿದ್ದ ದಂಪತಿ ಹಾಗೂ ಮಕ್ಕಳು ಮಳೆರಾಯನ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಸದ್ಯ ಕಟ್ಟಡಗಳ ಅವಶೇಷ ತೆರವು ನಡೆಯುತ್ತಿದ್ದು, ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ.
ವಿಜಯಪುರ, ಮೇ 15: ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟ ದುರ್ದೈವಿಗಳು. ಗುರುನಾಥ್ ಅವರು ತಮ್ಮ ಸ್ವಂತ ಮನೆಯನ್ನು ದುರಸ್ತಿ ಮಾಡುತ್ತಿದ್ದ ಕಾರಣ, ಈ ಕುಟುಂಬವು ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇತ್ತು. ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯ ಹಳೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದ್ದರಿಂದ ಮನೆಯೊಳಗೆ ಮಲಗಿದ್ದ ನಾಲ್ವರು ಅವಶೇಷಗಳ ಅಡಿಯಲ್ಲಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅವಶೇಷಗಳ ಅಡಿಯಲ್ಲಿದ್ದ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆಯಿಂದ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ