ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ?
ಚಾಮರಾಜನಗರ ಜಿಲ್ಲೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಡಗರದಿಂದ ಜರುಗಿದೆ. ಬಂಡೀಪುರ ಅಭಯಾರಣ್ಯದಲ್ಲಿರುವ ಈ ದೇವಾಲಯ, ಸದಾ ಮಂಜಿನಿಂದ ಕೂಡಿರುವ ಕಾರಣಕ್ಕೆ "ದಕ್ಷಿಣ ಗೋವರ್ಧನಗಿರಿ" ಎಂದೂ ಪ್ರಸಿದ್ಧವಾಗಿದೆ. ಖಾಸಗಿ ವಾಹನಗಳಿಗೆ ಪ್ರವೇಶವಿಲ್ಲದೆ, ಕೆಎಸ್ಆರ್ಟಿಸಿ ಬಸ್ಗಳ ಮೂಲಕ ಭಕ್ತರು ಬೆಟ್ಟ ಹತ್ತಿ ದೇವರ ದರ್ಶನ ಪಡೆಯುತ್ತಾರೆ.
ಚಾಮರಾಜನಗರ, ಸೆಪ್ಟೆಂಬರ್ 04: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಸುಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ದಟ್ಟ ಕಾನನದ ನಡುವೆ ಸಮುದ್ರ ಮಟ್ಟದಿಂದ 1450 ಮೀಟರ್ ಎತ್ತರದಲ್ಲಿ ನೆಲೆಸಿರುವ ಈ ದೇವಾಲಯವು, ವರ್ಷಪೂರ್ತಿ ಮಂಜಿನಿಂದ ಆವೃತವಾಗಿರುತ್ತದೆ. ಇದೇ ಕಾರಣಕ್ಕೆ ಇದನ್ನು ಹಿಮವದ್ ಗೋಪಾಲಸ್ವಾಮಿ ಬೆಟ್ಟ ಎಂದು ಕರೆಯಲಾಗುತ್ತದೆ. ದಕ್ಷಿಣ ಗೋವರ್ಧನಗಿರಿ ಎಂದೂ ಖ್ಯಾತವಾಗಿರುವ ಈ ದೇವಾಲಯವು ಚೋಳರ ಕಾಲದಲ್ಲಿ ನಿರ್ಮಾಣಗೊಂಡು, ನಂತರ ಹೊಯ್ಸಳರು ಮತ್ತು ಮೈಸೂರು ಒಡೆಯರ್ರಿಂದ ಪುನರುತ್ಥಾನಗೊಂಡಿದೆ. ಈ ಪ್ರದೇಶವು ವನ್ಯಜೀವಿ ಸಂರಕ್ಷಿತ ವಲಯದಲ್ಲಿರುವುದರಿಂದ, ಭಕ್ತರು ಮತ್ತು ಪ್ರವಾಸಿಗರಿಗೆ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶವಿಲ್ಲ. ಬೆಟ್ಟದ ತಪ್ಪಲಿನಲ್ಲಿ ತಮ್ಮ ವಾಹನಗಳನ್ನು ನಿಲುಗಡೆ ಮಾಡಿ, ಅಲ್ಲಿಂದ ಕೆಎಸ್ಆರ್ಟಿಸಿ ಬಸ್ಗಳ ಮೂಲಕ ಬೆಟ್ಟವನ್ನು ಏರಬೇಕಾಗುತ್ತದೆ. ಬೆಳಗ್ಗೆ 8:30 ರಿಂದ ಸಂಜೆ 4:00 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾವಿರಾರು ಭಕ್ತರು ಶ್ರೀಕೃಷ್ಣನ ದರ್ಶನ ಪಡೆದು ಪುನೀತರಾದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
