ಚಿಕ್ಕಮಗಳೂರು: ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್, ಜನರು ಕಂಗಾಲು

Edited By:

Updated on: Mar 01, 2026 | 8:40 AM

ಚಿಕ್ಕಮಗಳೂರಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ರಸ್ತೆ ಮೂಲಕ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು, ಕಾಡಾನೆಗಳು ಕಂಡುಬಂದಲ್ಲಿ ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ. ಮುಂದಿನ ಕೆಲ ದಿನಗಳ ಕಾಲ ಪರಿಸ್ಥಿತಿ ತೀವ್ರವಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯರು ಜಾಗರೂಕರಾಗಿರಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಗಳೂರು, ಮಾರ್ಚ್ 1: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಮಾರ್ಗವಾಗಿ ಬಂದಿರುವ ಈ ಹಿಂಡು ಕಳೆದ ನಾಲ್ಕು ದಿನಗಳಿಂದ ವಿವಿಧ ಗ್ರಾಮಗಳ ಸುತ್ತಮುತ್ತ ಬೀಡುಬಿಟ್ಟಿದೆ. ಕಸ್ಕೆಬೈಲು ಗ್ರಾಮದ ಸಮೀಪ ರಸ್ತೆಯಲ್ಲೇ ಕಾಡಾನೆಗಳು ತಂಗಿರುವುದರಿಂದ ವಾಹನ ಸವಾರರು ಭಯಭೀತರಾಗಿದ್ದಾರೆ. ಅಲ್ಲದೆ ಕಾಫಿ ತೋಟಗಳಲ್ಲಿಯೂ ಕಾಡಾನೆಗಳ ಸಂಚಾರ ಕಂಡುಬಂದಿದ್ದು, ಕಾರ್ಮಿಕರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಬೀಟಮ್ಮ, ಭುವನೇಶ್ವರಿ ಹಾಗೂ ಭೀಮಾ ಗ್ಯಾಂಗ್ ಎಂದು ಗುರುತಿಸಲ್ಪಟ್ಟಿರುವ ಈ ಕಾಡಾನೆಗಳ ಹಿಂಡು ಕಸ್ಕೆಬೈಲು, ಕಲ್ಲುಗುಡ್ಡ, ಗಡಿ ಚೌಕ, ಕಮ್ಮರಗೋಡು ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಓಡಾಟ ನಡೆಸುತ್ತಿವೆ. ಹಿಂಡಿನಿಂದ ಬೇರ್ಪಟ್ಟ ಕೆಲವು ಆನೆಗಳು ಅಲೆದಾಡುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಮೂಡಿಗೆರೆ ಅರಣ್ಯ ವಲಯ ಅಧಿಕಾರಿಗಳು ಸ್ಥಳದಲ್ಲೇ ಶಿಬಿರ ಹೂಡಿ ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ. ಗ್ರಾಮಸ್ಥರು ಅನಾವಶ್ಯಕವಾಗಿ ಹೊರಗೆ ಸಂಚರಿಸಬಾರದು, ರಾತ್ರಿ ವೇಳೆಯಲ್ಲಿ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us