ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಹೊಳೆನರಸೀಪುರದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ

Edited By:

Updated on: Jul 13, 2026 | 9:37 AM

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಬ್ಬೂರು ಸಮೀಪ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 7 ಕೆಜಿ ಗಾಂಜಾ, ಒಂದು ಸ್ಕೂಟಿ ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಆರೋಪಿ ಮಹಿಳೆ ಮೈಸೂರಿನ ಕೆ.ಆರ್.ನಗರ ತಾಲೂಕಿನ ಮೇಲೂರು ಗ್ರಾಮದಾಕೆ.

ಹಾಸನ, ಜುಲೈ 13: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದ ಸಮೀಪ ಸ್ಕೂಟಿಯಲ್ಲಿ ಬಂದು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಹಿಳೆಯನ್ನು ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮೇಲೂರು ಗ್ರಾಮದ ನಿವಾಸಿ ಶೀಲಾ ಎಂದು ಗುರುತಿಸಲಾಗಿದೆ. ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಹಳ್ಳಿಮೈಸೂರು ಠಾಣೆ ಪೊಲೀಸರು ಕಬ್ಬೂರು ಸಮೀಪ ದಾಳಿ ನಡೆಸಿದ್ದರು. ಈ ವೇಳೆ ಒಬ್ಬ ಆರೋಪಿ ಕಾರಿನಲ್ಲಿ ಬಂದಿದ್ದರೆ, ಮಹಿಳೆ ಸ್ಕೂಟಿಯಲ್ಲಿ ಬಂದು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರೆಂಬುದು ಬೆಳಕಿಗೆ ಬಂದಿದೆ.

ಪೊಲೀಸರು ದಾಳಿ ನಡೆಸುತ್ತಿದ್ದಂತೆ ಜಬೀ ಎಂಬ ಆರೋಪಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳದಲ್ಲಿದ್ದ ಶೀಲಾಳನ್ನು ಪೊಲೀಸರು ಬಂಧಿಸಿ, ಆಕೆಯ ಬಳಿಯಿದ್ದ 7 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದೇ ವೇಳೆ ಸ್ಕೂಟಿ ಹಾಗೂ ಕಾರನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ. ಪರಾರಿಯಾಗಿರುವ ಆರೋಪಿ ಜಬೀಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದೆ. ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us