ಬಳ್ಳಾರಿ: ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!

Edited By:

Updated on: Sep 16, 2026 | 11:31 AM

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಕುಡಿಯುವ ನೀರಿನಲ್ಲಿ ಹುಳುಗಳು ಪತ್ತೆಯಾಗಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸಭೆಯಲ್ಲಿ ಅಧಿಕಾರಿಗಳಿಗೆ ಕಲುಷಿತ ನೀರನ್ನು ಪ್ರದರ್ಶಿಸಿ, ಕುಡಿಯುವ ನೀರು ಪೂರೈಕೆ ವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿದ್ದಾರೆ. ಅಧಿಕಾರಿಗಳನ್ನು ಸಾರ್ವಜನಿಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಳ್ಳಾರಿ, ಸೆಪ್ಟೆಂಬರ್ 16: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಕುಡಿಯುವ ನೀರಿನಲ್ಲಿ ಹುಳುಗಳು ಪತ್ತೆಯಾಗುತ್ತಿದ್ದು, ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ಮನೆಮಾಡಿದೆ. ಗ್ರಾಮಸಭೆಯಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರು ಬಾಟಲಿಗಳಲ್ಲಿ ಹುಳು ಹಿಡಿದಿದ್ದ ನೀರನ್ನು ತಂದು ಅಧಿಕಾರಿಗಳ ಮುಂದೆಯೇ ಪ್ರದರ್ಶಿಸಿದ್ದಾರೆ. ಎಇ ರಾಹುಲ್ ನೇತೃತ್ವದಲ್ಲಿ ನಡೆದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ‘ಇದೇನಾ ಜನರಿಗೆ ನೀಡುತ್ತಿರುವ ಕುಡಿಯುವ ನೀರು?’ ಎಂದು ಪ್ರಶ್ನಿಸಿದ ಗ್ರಾಮಸ್ಥರು, ‘ಕಲುಷಿತ ನೀರನ್ನು ನೀವೇ ಕುಡಿಯಿರಿ’ ಎಂದು ಆಕ್ರೋಶಭರಿತರಾಗಿ ಆಗ್ರಹಿಸಿದರು. ನಾಲ್ಕು ತಿಂಗಳಿನಿಂದ ಈ ಸಮಸ್ಯೆ ಇದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಮೇ ತಿಂಗಳಿನಿಂದ ಈ ಸಮಸ್ಯೆ ತಮ್ಮ ಗಮನಕ್ಕೆ ಬಂದಿತ್ತು ಎಂದು ಎಇ ತಿಳಿಸಿದ್ದಾರೆ. ಆದರೆ, ಇಲ್ಲಿಯವರೆಗೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ವಾದಿಸಿದ್ದಾರೆ. ನೀರು ಸರಬರಾಜು ವ್ಯವಸ್ಥೆಯನ್ನು ಸ್ವಚ್ಛಗೊಳಿಸಿ ಶುದ್ಧ ನೀರನ್ನು ನೀಡುವಂತೆ ಮತ್ತು ನೀರಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಗುಣಮಟ್ಟ ಪರಿಶೀಲಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಚರಂಡಿ, ರಸ್ತೆ ಮತ್ತು ಇತರೆ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೂ ಆಗ್ರಹಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us