ಯಾದಗಿರಿ: ಕಡೇಚೂರಿನಲ್ಲಿ ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ

Edited By:

Updated on: Aug 05, 2026 | 11:27 AM

ಯಾದಗಿರಿ ಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದ ಸಿ.ಐ.ಎಲ್ ಲ್ಯಾಬೊರೇಟರಿ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು, ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಕ್ರಂ ಸಿಂಗ್, ಸಂಜಯ್ ಸಿಂಗ್, ಗಣೇಶ್ ಮೃತಪಟ್ಟ ದುರ್ದೈವಿಗಳು. ಸುರಕ್ಷತಾ ಕ್ರಮಗಳ ಲೋಪದಿಂದ ಈ ದುರಂತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಯಾದಗಿರಿ, ಆಗಸ್ಟ್ 5: ಯಾದಗಿರಿ ಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿರುವ ಸಿಐಎಲ್ ಲ್ಯಾಬೊರೇಟರಿ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾಗಿ ಭೀಕರ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಇಬ್ಬರು ಅಸ್ವಸ್ಥಗೊಂಡಿದ್ದಾರೆ. ಮಧ್ಯಪ್ರದೇಶ ಮೂಲದ ವಿಕ್ರಂ ಸಿಂಗ್, ಸಂಜಯ್ ಸಿಂಗ್ ಮತ್ತು ತೆಲಂಗಾಣ ಮೂಲದ ಗಣೇಶ್ ಎಂಬುವವರು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ತೆಲಂಗಾಣದ ಶಿವಕುಮಾರ್ ಮತ್ತು ಆಂಧ್ರಪ್ರದೇಶದ ಹೇಮಂತ್ ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರ್ಮಿಕರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾಗ ರಾಸಾಯನಿಕ ಸೋರಿಕೆಯಾಗಿದೆ. ಸೋರಿಕೆಯಾದ ರಾಸಾಯನಿಕ ಗಾಳಿಯಲ್ಲಿ ಸೇರಿ ಉಸಿರಾಟದ ಸಮಸ್ಯೆಗೆ ಕಾರಣವಾಗಿದೆ.

ದುರಂತ ಸಂಭವಿಸಿದ ತಕ್ಷಣವೇ ಸ್ಥಳೀಯರು ಕಾರ್ಮಿಕರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ. ಯಾದಗಿರಿ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಮತ್ತು ಎಸ್‌ಪಿ ಪ್ರದೀಪ್ ಶಂಕರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us