ಇತ್ತ ಭಾರತ, ಅತ್ತ ಬಲೂಚ್ ದಾಳಿಗೆ ಕಂಗೆಟ್ಟ ಪಾಕಿಸ್ತಾನ: ಗ್ಯಾಸ್ ಪೈಪ್​ಲೈನ್ ಸ್ಫೋಟಿಸಿದ ಬಿಎಲ್​ಎ

ಪಾಕಿಸ್ತಾನದ ಪ್ರಚೋದನೆಗೆ ಭಾರತೀಯ ಸೇನೆ ತಕ್ಕ ತಿರುಗೇಟು ನೀಡುತ್ತಿದೆ. ಭಾರತೀಯ ಸೇನಾ ಪಡೆಗಳ ದಾಳಿಗೆ ಪಾಕಿಸ್ತಾನ ತತ್ತರಿಸಿದ್ದರೆ, ಅತ್ತ ಬಲೂಚ್ ಲಿಬರೇಷನ್ ಆರ್ಮಿ ಕೂಡ ಪಾಕಿಸ್ತಾನದ ಕೆಲವು ನಗರಗಳ ಮೇಲೆ ದಾಳಿ ನಡೆಸಿದೆ. ಆಯಕಟ್ಟಿನ ಪ್ರದೇಶವೊಂದರ ಗ್ಯಾಸ್ ಪೈಪ್​ಲೈನ್ ಸ್ಫೋಟಿಸಿದೆ. ಪಾಕಿಸ್ತಾನದ ಸೈನಿಕನೊಬ್ಬ ಸಾವನ್ನಪ್ಪಿರುವ ಬಗ್ಗೆಯೂ ವರದಿಯಾಗಿದೆ.

ಇತ್ತ ಭಾರತ, ಅತ್ತ ಬಲೂಚ್ ದಾಳಿಗೆ ಕಂಗೆಟ್ಟ ಪಾಕಿಸ್ತಾನ: ಗ್ಯಾಸ್ ಪೈಪ್​ಲೈನ್ ಸ್ಫೋಟಿಸಿದ ಬಿಎಲ್​ಎ
ಸಾಂದರ್ಭಿಕ ಚಿತ್ರ

Updated on: May 09, 2025 | 7:56 AM

ನವದೆಹಲಿ, ಮೇ 9: ಭಾರತೀಯ ಸೇನಾಪಡೆಗಳ ಪ್ರತಿ ದಾಳಿಗೆ ಬೆಚ್ಚಿಬಿದ್ದಿರುವ ಪಾಕಿಸ್ತಾನ (Pakistan) ಆಂತರಿಕ ಬಿಕ್ಕಟ್ಟಿನಿಂದಲೂ ಇಕ್ಕಟ್ಟಿಗೆ ಸಿಲುಕಿದೆ. ಆಪರೇಷನ್ ಸಿಂದೂರ್ ನಂತರ ಭಾರತವು ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿದ್ದರೆ, ಪಾಕಿಸ್ತಾನದೊಳಗಿನ ಬಲೂಚಿಸ್ತಾನದಲ್ಲಿರುವ ಬಂಡುಕೋರ ಸಂಘಟನೆ ಬಲೂಚ್ ಲಿಬರೇಶನ್ ಆರ್ಮಿ (BLA) ಪಾಕಿಸ್ತಾನಿ ಸೇನೆಯ ನೆಲೆಗಳ ಮೇಲೆ ಪ್ರಮುಖ ದಾಳಿ ನಡೆಸಿದೆ. ಅಲ್ಲದೆ, ಆಯಕಟ್ಟಿನ ಮಹತ್ವದ ಗ್ಯಾಸ್ ಪೈಪ್‌ಲೈನ್ ಅನ್ನು ಸಹ ಸ್ಫೋಟಿಸಿದೆ.

ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನದ ಕೀಚ್, ಮಸ್ತುಂಗ್ ಮತ್ತು ಕಚಿ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಮತ್ತು ಅದರ ಮಿತ್ರಪಕ್ಷಗಳ ಮೇಲೆ ಆರು ಪ್ರತ್ಯೇಕ ದಾಳಿಗಳನ್ನು ನಡೆಸಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ ಹೇಳಿಕೊಂಡಿದೆ. ಈ ದಾಳಿಗಳಲ್ಲಿ ರಿಮೋಟ್ ಕಂಟ್ರೋಲ್ಡ್ ಬಾಂಬ್‌ಗಳು ಮತ್ತು ಶಸ್ತ್ರಾಸ್ತ್ರಗಳನ್ನು ಬಳಸಲಾಗಿದೆ. ಜಮ್ರಾನ್ ಪ್ರದೇಶದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಪಾಕಿಸ್ತಾನಿ ಸೇನಾ ಸೈನಿಕನೊಬ್ಬ ಸಾವನ್ನಪ್ಪಿದ್ದಾನೆ. ಹಲವಾರು ಸೇನಾ ನೆಲೆಗಳ ಮೇಲೆ ನಡೆದ ಸಶಸ್ತ್ರ ದಾಳಿಯಲ್ಲಿ ಪಾಕಿಸ್ತಾನ ಸೇನೆಯು ಜೀವ ಮತ್ತು ಆಸ್ತಿಪಾಸ್ತಿ ನಷ್ಟ ಅನುಭವಿಸಿದೆ ಎಂದು ಬಿಎಲ್​ಎ ಪ್ರತಿಪಾದಿಸಿದೆ.

ಸೇನಾ ಸಾಮಗ್ರಿ ಸಾಗಿಸುತ್ತಿದ್ದ ಪಾಕಿಸ್ತಾನದ ಟ್ರಕ್ ಧ್ವಂಸ

ಅದಕ್ಕೂ ಮುನ್ನ, ಸೇನಾ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಟ್ರಕ್ ಮೇಲೆ ಬಿಎಲ್‌ಎ ಬಾಂಬ್ ದಾಳಿ ನಡೆಸಿತ್ತು. ಯುಫೋನ್ ಕಂಪನಿಯ ಮೊಬೈಲ್ ಟವರ್‌ಗೆ ಕೂಡ ಹಾನಿ ಮಾಡಿತ್ತು. ಪಾಕಿಸ್ತಾನಿ ಸೈನ್ಯಕ್ಕೆ ಸಹಾಯ ಮಾಡಬೇಡಿ ಎಂದು ಬಿಎಲ್​ಎ ಸ್ಥಳೀಯ ಜನರಿಗೆ ಎಚ್ಚರಿಕೆ ನೀಡಿದೆ. ಅಲ್ಲದೆ, ಈ ಎಲ್ಲಾ ದಾಳಿಗಳ ಜವಾಬ್ದಾರಿಯನ್ನು ಬಿಎಲ್‌ಎ ವಹಿಸಿಕೊಂಡಿದೆ ಮತ್ತು ಇದನ್ನು ಬಲೂಚ್ ಸ್ವಾತಂತ್ರ್ಯ ಹೋರಾಟದ ಭಾಗವೆಂದು ಕರೆದಿದೆ.

ಇದನ್ನೂ ಓದಿ
ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು
ಮತ್ತೆ ಪಾಕಿಸ್ತಾನದೊಳಗೆ ನುಗ್ಗಿದ ಭಾರತ; ಇಸ್ಲಮಾಬಾದ್, ಲಾಹೋರ್ ಮೇಲೆ ದಾಳಿ
ಚೀನಾ ಜೆಟ್‌ ಬಳಸಿದ್ದೇವೆಂಬ ಪಾಕ್ ಹೇಳಿಕೆಗೆ ಬೀಜಿಂಗ್ ಪ್ರತಿಕ್ರಿಯೆ
ದಾಳಿಗೆ ಯತ್ನ: ಪಾಕ್​​​ ಫೈಟರ್​ ಜೆಟ್ ಧ್ವಂಸಗೊಳಿಸಿದ​ ಭಾರತೀಯ ಸೇನಾಪಡೆ

ಭಾರತದ ವಿರುದ್ಧದ ವಾಯು ಮತ್ತು ಡ್ರೋನ್ ದಾಳಿಗಳಲ್ಲಿ ಪಾಕಿಸ್ತಾನ ವಿಫಲವಾಗಿದ್ದು, ಈಗ ತನ್ನದೇ ದೇಶದಲ್ಲಿ ಪ್ರತ್ಯೇಕತಾವಾದಿ ದಾಳಿಗಳನ್ನು ಎದುರಿಸುವಲ್ಲಿಯೂ ವಿಫಲವಾಗಿದೆ. ಮೂಲಗಳ ಪ್ರಕಾರ, ಬಲೂಚಿಸ್ತಾನದ ಹಲವು ಭಾಗಗಳಲ್ಲಿ ಪಾಕಿಸ್ತಾನ ಸೇನೆಯ ಮುಂಚೂಣಿ ಠಾಣೆಗಳನ್ನು ಗುರಿಯಾಗಿಸಿಕೊಂಡು ಬಿಎಲ್‌ಎ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಪಾಕಿಸ್ತಾನಿ ಸೇನೆಯು ಭಾರೀ ನಷ್ಟ ಅನುಭವಿಸಿದೆ. ಪ್ರಸ್ತುತ ಒಬ್ಬ ಪಾಕಿಸ್ತಾನಿ ಸೈನಿಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಇಕ್ಕಟ್ಟಿನಲ್ಲಿ ಪಾಕಿಸ್ತಾನ ಸರ್ಕಾರ

ಆಪರೇಷನ್ ಸಿಂಧೂರ್‌ನಿಂದಾಗಿ ಪಾಕಿಸ್ತಾನದ ಆಡಳಿತವು ಈಗಾಗಲೇ ಒತ್ತಡದಲ್ಲಿದೆ. ಭಾರತ ನಡೆಸಿದ ಪ್ರತೀಕಾರದ ದಾಳಿಯ ಪರಿಣಾಮ ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಗಳು ಮತ್ತು ಕ್ಷಿಪಣಿ ಉಡಾವಣಾ ತಾಣಗಳು ಭಾರಿ ಹಾನಿಗೊಳಗಾಗಿವೆ. ಈಗ ಬಲೂಚಿಸ್ತಾನದಲ್ಲಿ ನಡೆದ ಬಿಎಲ್‌ಎ ದಾಳಿಯು ಪಾಕಿಸ್ತಾನ ಸರ್ಕಾರದ ಆಂತರಿಕ ದೌರ್ಬಲ್ಯವನ್ನು ಮತ್ತಷ್ಟು ಬಹಿರಂಗಪಡಿಸಿದೆ.

ಇದನ್ನೂ ಓದಿ: ಭಾರತ ಉಗ್ರರ ಟಾರ್ಗೆಟ್ ಮಾಡಿದ್ರೆ ಪಾಕಿಸ್ತಾನ ಸೇನೆ ಮೇಲೆಯೇ ದಾಳಿ ನಡೆಸಿದ ಬಲೂಚ್ ಆರ್ಮಿ: 12 ಪಾಕ್ ಸೈನಿಕರು ಸಾವು

ಆಪರೇಷನ್ ಸಿಂಧೂರ್ ನಂತರ ಅಂತರರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನದ ವರ್ಚಸ್ಸಿಗೆ ಮತ್ತಷ್ಟು ಹಾನಿಯಾಗಿದೆ. ಈಗ ಆಂತರಿಕ ದಂಗೆಯು ಪಾಕಿಸ್ತಾನವನ್ನು ಮತ್ತಷ್ಟು ಅಸ್ಥಿರಗೊಳಿಸಿದೆ ಎಂದು ತಜ್ಞರು ಭಾವಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:48 am, Fri, 9 May 25

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us