Pahalgam Terrorist Attack: ಭಾರತದ ನಿರ್ಧಾರಕ್ಕೆ ಪಾಕ್ ತತ್ತರ, ತುರ್ತಾಗಿ ಉನ್ನತ ಮಟ್ಟದ ಸಭೆ ಕರೆದ ಪಾಕಿಸ್ತಾನ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್(Pahalgam)ನಲ್ಲಿ ನಡೆದ ಭಯೋತ್ಪಾದಕ ದಾಳಿ(Terror Attack)ಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ದಾಳಿಯನ್ನು ಬಲವಾಗಿ ಖಂಡಿಸಿದ ಭಾರತ, ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ದೊಡ್ಡ ಕ್ರಮ ಕೈಗೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಅನೇಕ ದೊಡ್ಡ ಆಘಾತ ನೀಡಿದೆ.

ಇಸ್ಲಾಮಾಬಾದ್, ಏಪ್ರಿಲ್ 24: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್(Pahalgam)ನಲ್ಲಿ ನಡೆದ ಭಯೋತ್ಪಾದಕ ದಾಳಿ(Terror Attack)ಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ದಾಳಿಯನ್ನು ಬಲವಾಗಿ ಖಂಡಿಸಿದ ಭಾರತ, ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ದೊಡ್ಡ ಕ್ರಮ ಕೈಗೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಅನೇಕ ದೊಡ್ಡ ಆಘಾತ ನೀಡಿದೆ.
ಒಂದೆಡೆ ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸುವ ಮೂಲಕ ಪಾಕಿಸ್ತಾನಕ್ಕೆ ದೊಡ್ಡ ಸಮಸ್ಯೆಯನ್ನು ಸೃಷ್ಟಿಸಿದೆ, ಮತ್ತೊಂದೆಡೆ, ಪಾಕಿಸ್ತಾನದ ರಾಯಭಾರ ಕಚೇರಿಯನ್ನು ಮುಚ್ಚುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನಿಗಳು 48 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಸೂಚನೆಗಳನ್ನು ನೀಡಲಾಗಿದೆ. ಈಗ ಭಾರತದ ಈ ಹೆಜ್ಜೆಗಳಿಂದ ಪಾಕಿಸ್ತಾನವು ತೊಂದರೆಗೀಡಾಗಿದೆ. ಪಾಕಿಸ್ತಾನದಲ್ಲಿ ತುರ್ತಾಗಿ ಉನ್ನತ ಮಟ್ಟದ ಸಭೆ ಕರೆದಿದೆ.
ಭಾರತದ ಕ್ರಮಗಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಪಾಕಿಸ್ತಾನದ ಉನ್ನತ ನಾಗರಿಕ ಸಂಸ್ಥೆ ಗುರುವಾರ ಸಭೆ ಸೇರಲಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಬುಧವಾರ ತಡರಾತ್ರಿ ತಿಳಿಸಿದ್ದಾರೆ. ಪ್ರಧಾನಿ ಶಹಬಾಜ್ ಷರೀಫ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ನಡೆಯಲಿದೆ ಎಂದು ಆಸಿಫ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಖ್ವಾಜಾ ಆಸಿಫ್ ಹೇಳಿದ್ದೇನು? ಭಾರತದ ಕ್ರಮಗಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಈ ಸಭೆಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಮಾಹಿತಿಯ ಪ್ರಕಾರ, ಎಲ್ಲಾ ಸಶಸ್ತ್ರ ಪಡೆಗಳ ಮುಖ್ಯಸ್ಥರು ಮತ್ತು ಪ್ರಮುಖ ಕ್ಯಾಬಿನೆಟ್ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಂಗಳವಾರ ಪಹಲ್ಗಾಮ್ನಲ್ಲಿ ನಡೆದ ದಾಳಿಯ ನಂತರ, ಭಾರತವು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವನ್ನು ಅಳವಡಿಸಿಕೊಳ್ಳುವ ಮೂಲಕ ಅನೇಕ ದೊಡ್ಡ ಘೋಷಣೆಗಳನ್ನು ಮಾಡಿದೆ. ಪಹಲ್ಗಾಮ್ ದಾಳಿಗೂ ಪಾಕಿಸ್ತಾನಕ್ಕೂ ಸಂಬಂಧವಿಲ್ಲ ಎಂದು ಖ್ವಾಜಾ ಹೇಳಿದ್ದಾರೆ.
ಮತ್ತಷ್ಟು ಓದಿ: ಮೆಹಂದಿ ಮಾಸುವ ಮುನ್ನವೇ ನೌಕಾಪಡೆ ಅಧಿಕಾರಿ ಪತ್ನಿಯ ಕುಂಕುಮ ಅಳಿಸಿದ ಉಗ್ರರು
ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ನೀಡಿರುವ ಪ್ರತಿಕ್ರಿಯೆಯಲ್ಲಿ, ಅನಂತನಾಗ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ಪ್ರವಾಸಿಗರು ಸಾವನ್ನಪ್ಪಿದ ಬಗ್ಗೆ ನಮಗೆ ಬೇಸರವಿದೆ, ಮೃತರ ಕುಟುಂಬಗಳಿಗೆ ನಮ್ಮ ಸಂತಾಪ ಸೂಚಿಸುತ್ತೇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ ಎಂದು ಬರೆದಿದ್ದರು.
ಭಾರತದ ತ್ವರಿತ ಕ್ರಮ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯ ನಂತರ, 1960 ರಲ್ಲಿ ಜಾರಿಗೆ ಬಂದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿಯಲು ಭಾರತ ನಿರ್ಧರಿಸಿದೆ ಅದೇ ಸಮಯದಲ್ಲಿ, ಭಾರತವು ಅಟ್ಟಾರಿ ಚೆಕ್ ಪೋಸ್ಟ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚುವುದಾಗಿ ಘೋಷಿಸಿದೆ.
ಇದಲ್ಲದೆ, ಸಾರ್ಕ್ ವೀಸಾ ವಿನಾಯಿತಿ ಯೋಜನೆಯಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಪ್ರಯಾಣಿಸಲು ಅನುಮತಿ ಇರುವುದಿಲ್ಲ ಮತ್ತು ಈ ಹಿಂದೆ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಯಾವುದೇ ಅಂತಹ ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಭಾರತದಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:13 am, Thu, 24 April 25