ಪಾಕಿಸ್ತಾನ ಶಾಂತಿಯ ಪರ; ಕದನ ವಿರಾಮದ ಬಗ್ಗೆ ಪಾಕ್ ವಿದೇಶಾಂಗ ಸಚಿವ ಪ್ರತಿಕ್ರಿಯೆ
ನಾವು ಭಾರತದೊಂದಿಗೆ ಕದನ ವಿರಾಮಕ್ಕೆ ಸಿದ್ಧವಾಗಿರುವುದು ನಿಜ. ಇಸ್ಲಾಮಾಬಾದ್ ಶಾಂತಿಗಾಗಿ ಶ್ರಮಿಸುತ್ತಿದೆ ಎಂದು ಭಾರತ-ಪಾಕಿಸ್ತಾನ ಒಪ್ಪಂದವನ್ನು ಪಾಕಿಸ್ತಾನ ವಿದೇಶಾಂಗ ಸಚಿವ ಇಶಾಕ್ ದಾರ್ ದೃಢಪಡಿಸಿದ್ದಾರೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಅಥವಾ ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರದೆ ಪ್ರಾದೇಶಿಕ ಶಾಂತಿಗಾಗಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಇಶಾಕ್ ದಾರ್ ಹೇಳಿದ್ದಾರೆ.

ಇಸ್ಲಮಾಬಾದ್, ಮೇ 10: ಭಾರತ ಮತ್ತು ಪಾಕಿಸ್ತಾನ ನಡುವೆ ತಕ್ಷಣದ ಕದನ ವಿರಾಮದ (India-Pakistan Ceasefire) ಬಗ್ಗೆ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ ಕೆಲವೇ ನಿಮಿಷಗಳ ನಂತರ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಹೇಳಿಕೆ ನೀಡಿದ್ದು, ಇಸ್ಲಾಮಾಬಾದ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸಿದೆ” ಎಂದು ಹೇಳುವ ಮೂಲಕ ಪಾಕಿಸ್ತಾನ ಮಾಡಿದ ಕುಕೃತ್ಯಗಳನ್ನೆಲ್ಲ ಮರೆಮಾಚುವ ಪ್ರಯತ್ನ ಮಾಡಿದ್ದಾರೆ.
ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMO) ಭಾರತೀಯ ವಿದೇಶಾಂಗ ಕಾರ್ಯದರ್ಶಿಗೆ ಕರೆ ಮಾಡಿ ಇಂದು ಸಂಜೆ 5 ಗಂಟೆಯಿಂದ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲಾಗಿದೆ ಎಂದು ಘೋಷಿಸಿದ್ದಾರೆ ಎಂದು ಭಾರತ ಘೋಷಿಸಿದ ಸ್ವಲ್ಪ ಸಮಯದ ನಂತರ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಇಶಾಕ್ ದಾರ್ ದೃಢಪಡಿಸಿದ್ದಾರೆ. ಪಹಲ್ಗಾಮ್ ದಾಳಿಯ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಕಾರಣ ಪಾಕಿಸ್ತಾನ ಶಾಂತಿಗಾಗಿ ಶ್ರಮಿಸುತ್ತಿದೆ ಎಂದು ಇಶಾಕ್ ದಾರ್ ಸುಳ್ಳು ಹೇಳಿದ್ದಾರೆ.
ಇದನ್ನೂ ಓದಿ: ಭಾರತ, ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ
ಯುನೈಟೆಡ್ ಸ್ಟೇಟ್ಸ್ ಎರಡು ರಾಷ್ಟ್ರಗಳ ನಡುವೆ ಯುದ್ಧವನ್ನು ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ನಂತರ ಅವರ ಹೇಳಿಕೆ ಬಂದಿದೆ. “ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನವು ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು” ಎಂದು ಟ್ರಂಪ್ ಟ್ರೂತ್ ಸೋಶಿಯಲ್ನಲ್ಲಿ ಬರೆದಿದ್ದಾರೆ.
Pakistan and India have agreed to a ceasefire with immediate effect. Pakistan has always strived for peace and security in the region, without compromising on its sovereignty and territorial integrity!
— Ishaq Dar (@MIshaqDar50) May 10, 2025
ಕದನ ವಿರಾಮ ಒಪ್ಪಂದದ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಎರಡೂ ದೇಶಗಳ ಮಿಲಿಟರಿ ಅಧಿಕಾರಿಗಳ ನಡುವಿನ ನೇರ ಸಂಭಾಷಣೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ, ಮೇ 12ಕ್ಕೆ ಮತ್ತೆ ಮಾತುಕತೆ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ
“ಪಾಕಿಸ್ತಾನದ ಡಿಜಿಎಂಒ ಇಂದು ಮಧ್ಯಾಹ್ನ 3:35ಕ್ಕೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದರು. ಭಾರತೀಯ ಕಾಲಮಾನ 5 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿನ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಎರಡೂ ಕಡೆಯವರು ನಿಲ್ಲಿಸುವುದಾಗಿ ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು. ಈ ನಿಯಮವನ್ನು ಜಾರಿಗೆ ತರಲು ಎರಡೂ ಕಡೆಯಿಂದಲೂ ಸೂಚನೆಗಳನ್ನು ನೀಡಲಾಗಿದೆ. ಎರಡೂ ದೇಶಗಳ ನಡುವೆ ಮೇ 12ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಯಲಿದೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:18 pm, Sat, 10 May 25